14 August 2010

ಮಾಲ್‌ಗಳೆಂಬ ಮಾಯಾವಿಗಳು



 ದಿನಬಳಕೆಯ ಎಲ್ಲಾ ವಸ್ತುಗಳೂ ಸ್ವಚ್ಛ ಸುಂದರ ಸುಸಜ್ಜಿತವಾದ ಒಂದೇ ಸೂರಿನಡಿಯಲ್ಲಿ ಲಭ್ಯ. ಸಾವಿರಾರು ವಾಹನಗಳಿಗೆ ಅಚ್ಚುಕಟ್ಟಾದ ಪಾರ್ಕಿಂಗ್ ಸೌಲಭ್ಯ. ಮನೋರಂಜನೆಗೆ ಐಶಾರಾಮಿ ಚಿತ್ರಮಂದಿರಗಳು, ಆಟ, ಈಜಾಟಕ್ಕೂ ಅವಕಾಶ. ಹೊಟ್ಟೆ ಹಸಿವು ತಣಿಸಲು ಬಗೆ ಬಗೆಯ ರೆಸ್ಟೋರೆಂಟ್‌ಗಳು. - ಇವೆಲ್ಲ ಕೋಟಿಗಟ್ಟಲೆ ಬಂಡವಾಳ ಹೂಡಿ ಅದರ ದುಪ್ಪಟ್ಟು ಲಾಭ ಪಡೆವ ಶಾಪಿಂಗ್ ಮಾಲ್‌ಗಳ ಕಮಾಲ್! ಕಾಸಿದ್ದವ್ರಿಗೆ ಅದುವೇ ಕೈಲಾಸ!

೨೦೦೫ರಲ್ಲಿ ಭಾರತಕ್ಕೆ ಕಾಲಿರಿಸಿದ ಮಾಲ್‌ಗಳು ೨೦೦೯ರ ವೇಳೆಗೆ ನಾಲ್ಕುನೂರಕ್ಕೂ ಮೀರಿ ಬೆಳೆದು ನಿಂತಿವೆ.
ನಮ್ಮ ಬೆಂಗಳೂರಿನಲ್ಲಿ ಏಷ್ಯಾದಲ್ಲೇ ಅತೀ ದೊಡ್ಡ ಶಾಪಿಂಗ್ ಮಾಲ್ ಇದ್ಯಂತೆ. ಅಬ್ಬ ಎಷ್ಟು ಹೆಮ್ಮೆಯಿಂದ ಹೆಳ್ಕೊಳ್ತೇವೆ ನಾವು! ಆದ್ರೆ ಈ ಮಾಲ್‌ಗಳಿಂದಾಗಿ ಅದೆಷ್ಟು ಜನರ ಹೊಟ್ಟೆಗೆ ಏಟು ಬಿದ್ದಿರ್ಬಹುದು ಅಂತ ಯೋಚ್ನೆ ಮಾಡ್ತೇವಾ? ನೂರಾರು ಕಿರಾಣಿ ಅಂಗಡಿಗಳು, ತರಕಾರಿ ಗಾಡಿಗಳು, ಪುಟ್ಟ ಪುಟ್ಟ ಹೋಟೆಲ್‌ಗಳು ವ್ಯಾಪಾರವಿಲ್ದೆ ಬಸವಳೀತಾ ಇವೆ. ಇದ್ರ ಪರೋಕ್ಷ ಹೊಡೆತ ರೈತರ ಮೇಲೂ ಆಗುತ್ತೆ, ಖಂಡಿತ. ಒಂದಷ್ಟು ಜನ್ರಿಗೆ ಉದ್ಯೋಗಾವಕಾಶವೇನೋ ಸಿಕ್ಕಿರ್ಬಹುದು. ಆದ್ರೆ ಇನ್ನುಳಿದವ್ರ ಗತಿ?!

ಬಿಡುವಿಲ್ಲದ ದುಡಿಮೆಯ ಈ ಕಾಲದಲ್ಲಿ ಜನರು ಬಯಸೋದೂ ಇಂಥದ್ದನ್ನೇ. ಎಲ್ಲವೂ ಒಂದೇ ಕಡೆ ಸಿಗೋ ವ್ಯವಸ್ಥೇನೆ ಒಳ್ಳೆದು, ಸುಮ್ನೆ ಅಲೆಯೋ ಕೆಲ್ಸ ಇಲ್ವಲ್ಲ ಅಂತ. ಮತ್ತೆ ಕೆಲವ್ರಿಗೆ ಶಾಪಿಂಗ್ ಮಾಲ್‌ಗಳಲ್ಲಿ ಶಾಪಿಂಗ್ ಮಾಡೋದು ಒಂದು ಪ್ರತಿಷ್ಠೆ. ಒಟ್ಟಿನಲ್ಲಿ ಇಂಥ ಒಂದು ಬೆಳವಣಿಗೆಗೆ ನಾವೇ ಮೂಲ ಪ್ರೇರಣೆ, ಅಲ್ವಾ?

ನಮ್ಮ ಊರಲ್ಲೆಲ್ಲ ವಾರಕ್ಕೊಮ್ಮೆ ಸಂತೆ ನಡಿಯುತ್ತೆ. ಅಲ್ಲೂ ಹೀಗೇನೇ, ದಿನಬಳಕೆಗ್ ಬೇಕಾದ್ದೆಲ್ಲ ಸಿಗುತ್ತೆ. ನ್ಯಾಯಯುತವಾದ ಬೆಲೆಗೆ, ಯಾರಿಗೂ ಏನೂ ಅನ್ಯಾಯವಾಗದ ರೀತಿಯಲ್ಲಿ. ಅದು ವಾರಕ್ಕೊಮ್ಮೆ ನಡಿಯೋದು. ಆದ್ರೆ ಇದು ಪ್ರತಿ ದಿನವೂ. ಅಲ್ಲಿ ರೈತರೇ ಅಥವಾ ಉತ್ಪಾದಕರೇ ಸ್ವತಃ ಬಂದು ತಮ್ಮ ವಸ್ತುಗಳನ್ನು ಮಾರ್ತಾರೆ. ಇಲ್ಲಿ ಕೇವಲ 'ಬ್ರಾಂಡೆಡ್' ಕಂಪೆನಿಗಳು ಮಾತ್ರ. ಎಷ್ಟು ಅಜಗಜಾಂತರ ಅಲ್ವಾ?       

ಮಾಲ್‌ಗಳನ್ನು ಮಾಡ್ಲಿ ಪರ್ವಾಗಿಲ್ಲ. ಆದ್ರೆ ಅಲ್ಲಿ ನಮ್ಮವರಿಗೇನೆ ಅವಕಾಶ ಕೊಡ್ಬೇಕು. ದೊಡ್ಡ ದೊಡ್ಡ ವಿದೇಶಿ ಕಂಪೆನಿಗಳನ್ನು ಕಡಿಮೆ ಮಾಡಿ, ಹೊರಗಡೆ ಸಣ್ಣ ಪುಟ್ಟ ವ್ಯಾಪಾರ ಮಾಡುವ ನಮ್ಮವರನ್ನೇ ಒಳಕರೀಬೇಕು.. ಹಾಗಾದಾಗ ಆ ಅಭಿವೃದ್ಧಿಗೂ ಒಂದು ಅರ್ಥ ಬರುತ್ತೆ. ಏನಂತೀರಿ?

17 June 2010

ಇದು ಯಾವ ನ್ಯಾಯ?



೧೯೮೪, ಡಿಸೆಂಬರ್ ೨ರ ಮಧ್ಯರಾತ್ರಿ. ಭಾರತದ ಮಧ್ಯಭಾಗದಲ್ಲಿರುವ ಮಧ್ಯಪ್ರದೇಶದ ರಾಜಧಾನಿ ಭೋಪಾಲ್. ಕೂಲಿ ಕಾರ್ಮಿಕರಿಂದ ಹಿಡಿದು ದೊಡ್ಡ ಉದ್ಯಮಿಗಳ ವರೆಗೆ ಎಲ್ಲರೂ ದಣಿದು ಮನೆಸೇರಿ ಮಲಗಿದ್ರು. ಪುಟ್ಟ ಪುಟಾಣಿ ಮಕ್ಕಳೆಲ್ಲ ಸಿಹಿನಿದ್ದೆಯಲ್ಲಿ ಸವಿಗನಸು ಕಾಣ್ತಾ ಇದ್ರು. ಆಗಲೇ ಸುಳಿ ಸುಳಿದು ಬಂದಿತ್ತು, ಸದ್ದಿಲ್ಲದೆ ಸೋರಿಹೋದ ವಿಷಾನಿಲ ಮೃತ್ಯುರೂಪದಲ್ಲಿ! ಒಂದಲ್ಲ ಎರಡಲ್ಲ ಹದಿನೈದು ಸಾವಿರ ಜೀವಗಳು! ಮರುದಿನದ ಬೆಳಗನ್ನು ನೋಡದೇ ಕಣ್ಮುಚ್ಚಿದವು! ಮತ್ತಷ್ಟು ಸಾವಿರ ಜನ ಅಂಗಾಂಗ ಊನಗೊಂಡು ಹೀನಾಯ ಸ್ಥಿತಿ ತಲುಪಿದ್ರು. ಅದರ ಪರಿಣಾಮದ ಖಾಯಿಲೆಗಳು ಈಗಲೂ ಅನುವಂಶಿಕವಾಗಿ ಬಂದು ಕಾಡ್ತಾ ಇವೆ.
ಇಷ್ಟೆಲ್ಲ ಅನಾಹುತಕ್ಕೆ ಕಾರಣವಾದ ಯೂನಿಯನ್ ಕಾರ್ಬೈಡ್ ಪೆಸ್ಟಿಸೈಡ್ಸ್ ಕಾರ್ಖಾನೆಯ ಮುಖ್ಯಸ್ಥವರ್ಗದವರಿಗೆ ಸಿಕ್ಕಿದ್ದು ಕೇವಲ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ೧ ಲಕ್ಷ ರೂ ದಂಡ. ಅದೂ ೨೪ ವರ್ಷಗಳ ಸುದೀರ್ಘ ವಿಚಾರಣೆಯ ಬಳಿಕ!
ಹದಿನೈದು ಸಾವಿರ ಜೀವಗಳ ಬೆಲೆ ಇಷ್ಟೇನಾ??! 

ಶಿಕ್ಷೆ ಘೋಷಣೆಯಾದ ತಕ್ಷಣವೇ ಶಿಕ್ಷೆಯಾದ ಎಲ್ಲರೂ ಜಾಮೀನಿಗೆ ಅರ್ಜಿ ಸಲ್ಲಿಸಿ, ೨೫೦೦೦ ರೂ ಭದ್ರತಾ ಮುಚ್ಚಳಿಕೆ ಪಡ್ಕೊಂಡು ಜಾಮೀನು ಪಡ್ಕೊಂಡೇ ಬಿಟ್ರಂತೆ!
ಇದೆಲ್ಲ ಬದಿಗಿರ್ಲಿ. ದುರಂತಕ್ಕೆ ಪ್ರಮುಖ ಕಾರಣಕರ್ತನಾದ ವಾರೆನ್ ಆ‍ಯ್ಂಡರ್‌ಸನ್ ವಿರುದ್ಧ ಯಾವುದೇ ಪ್ರಸ್ತಾಪ ಆಗೇ ಇಲ್ಲ!
ಆತ ಅತಿಬುದ್ಧಿವಂತ. ೧೯೮೩ರ ವಾರ್ಷಿಕ ವರದಿಯಲ್ಲಿ ಭೋಪಾಲ್ ಅನಿಲ ಘಟಕ ಅಸುರಕ್ಷಿತವಾಗಿದೆ, ಕೆಲವಾರು ಸಮಸ್ಯೆಗಳಿವೆ ಎಂದು ವರದಿಯಾಗಿತ್ತು. ಆತ ಅದರ ಆಧಾರದಲ್ಲಿ ಅಮೆರಿಕಾದಲ್ಲಿರುವ ಅನಿಲ ಸ್ಥಾವರವನ್ನು ಸರಿಪಡಿಸಿದ. ಭಾರತದಲ್ಲಿ ಏನೇ ಆದ್ರೂ ಪರ್ವಾಗಿಲ್ಲ, ಅಮೆರಿಕದ ಪ್ರಜೆಗಳು ಸಾಯೊಲ್ವಲ್ಲ ಅಂತ! ತತ್‌ಪರಿಣಾಮವೇ ಈ ಭೀಕರ ದುರಂತ!
ಅಲ್ಲಿದ್ದ ಕೆಡುಕುಗಳು ಏನು ಅಂತ ಸ್ವಲ್ಪ ಗಮನಹರಿಸಿ ಅಂದೇ ಸರಿಪಡಿಸಿದ್ರೆ ಎಷ್ಟೋ ಸಾವಿರ ಸಾವು-ನೋವು ತಪ್ತಾ ಇತ್ತಲ್ವ.
ದುರಂತದ ಬಳಿಕ ಕಿಂಚಿತ್ತು ಪಶ್ಚಾತ್ತಾಪವಾದರೂ ಆಗಿದ್ಯಾ ಆ ಮನುಷ್ಯನಿಗೆ? ಊಹೂಂ. ಸರಕಾರದ ಸಹಕಾರದಿಂದ ಸರಳವಾಗಿ ತಲೆಮರೆಸಿಕೊಂಡು ಅಮೆರಿಕಕ್ಕೆ ಹಾರಿ ಹೋದ!

ಭಾರತದ ನ್ಯಾಯವ್ಯವಸ್ಥೆ ಎಷ್ಟು 'ಕರುಣಾ'ಜನಕವಾಗಿದೆ ಅನ್ನೋದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾ?
ದೇಶದ ಪ್ರಜೆಗಳಾದ ನಾವು ಸ್ವಲ್ಪ ಯೋಚಿಸ್ಬೇಕಲ್ವ? ಈ ನ್ಯಾಯ ವ್ಯವಸ್ಥೆಗೊಂದು ಮಹತ್ವದ ಮಾರ್ಪಾದು ಬರ್ಬೇಕಲ್ವ.. ಅದಕ್ಕೇಂತ ಇವತ್ತು ಒಂದು ಅರ್ಜಿ ಸಲ್ಲಿಸಿದ್ರೆ, ಅದರ ವಿಚಾರಣೆ ಆಗಿ, ಸಾಕ್ಷ್ಯಾಧಾರಗಳ ಪರಿಶೀಲನೆ, ಮರುಪರಿಶೀಲನೆ, ವಿಚಾರಣೆ, ಮರುವಿಚಾರಣೆಗಳೆಲ್ಲ ಆಗಿ ಕೊನೆಗೊಂದು ನಿರ್ಧಾರಕ್ಕೆ ಬರೋವಾಗ ನಮ್ಮ ಮೊಮ್ಮಕ್ಕಳ ಕಾಲವಾದೀತೇನೊ...!

ಅಂತೂ ಭೋಪಾಲ್ ಅನಿಲ ದುರಂತದಲ್ಲಿ ಬಲಿಯಾದವರ ಆತ್ಮಕ್ಕೆ ಶಾಂತಿಯಿರಲಿ ಒಂದು ನಿಡಿದಾದ ಉಸಿರೂ ಬಂದಿರಲಿಕ್ಕಿಲ್ಲ.

03 May 2010

ಸದ್ದಿಲ್ಲದೆ ಸಾಗುತಿದೆ ಮತ್ತೊಂದು ಆಕ್ರಮಣಪಥ...



ಸುಮಾರು ಹತ್ತು ದಿನಗಳ ಹಿಂದೆ ಪತ್ರಿಕೆಯೊಂದರ ಅಂಕಣಬರಹವೊಂದರಲ್ಲಿ (vk,22 April,'ನೂರೆಂಟು ಮಾತು') ಇಂಥದೊಂದು ಮಾಹಿತಿ ಓದಿ ನಿಜಕ್ಕೂ ದಂಗಾಗಿ ಹೋಯ್ತು.ಈ ವಿಚಾರ ಕೇಳಿದ್ರೆ ನಿಮ್ಗೂ ಆಶ್ಚರ್ಯವಾದೀತು.
ಇಡೀ ವಿಶ್ವವನ್ನು ಆವರಿಸಿರುವ 'ಚೀನಾದ ಪರಿಣಾಮ'ದ ಕುರಿತಾದ ಲೇಖನ ಅದು. "ಅಮೇರಿಕ,ಯುರೋಪ್,ಆಫ್ರಿಕಾ ಹಾಗೂ ಆಸ್ಟ್ರೇಲಿಯಾದ ಯಾವುದೇ ದೇಶಗಳಿಗೆ ಹೋದ್ರೂ Made in china ಸಾಮನುಗಳದ್ದೇ ಕಾರುಬಾರು. ಗಮನಿಸ್ಬೇಕಾದ ಪ್ರಮುಖ ಸಂಗತಿ ಅಂದ್ರೆ ಭಾರತದ ಎಲ್ಲ ಹಳ್ಳಿ, ಮನೆಗಳನ್ನೂ ಈ Made in china ಸಾಮಾನುಗಳು ಮುಟ್ಟಿವೆ. ಮುಂದಿನ ಹತ್ತು ವರ್ಷಗಳಲ್ಲಿ ಗುಂಡುಸೂಜಿ, ಬಟನ್, ಸಾಕ್ಸ್, ಪೆನ್, ಮಗ್, ರೇಜರ್, ಬ್ಲೇಡ್, ಬಕೆಟ್‌ನಿಂದ ಹಿಡಿದು ನಾವು ಉಪಯೋಗಿಸುವ ಶೇ.65ರಷ್ಟು ವಸ್ತುಗಳು ಚೀನದಲ್ಲಿಯೇ ಉತ್ಪಾದನೆಯಗಲಿದೆ! ಇಷ್ಟೇ ಆಗಿದ್ರೆ ok.ಆದ್ರೆ ನಾವು ನಿತ್ಯ ಪೂಜಿಸೋ ದೇವರ ವಿಗ್ರಹ,ದೇವರ ಫೋಟೋ,ಕುಂಕುಮ,ಅರಿಶಿನ,ದೇವರ ಫೋಟೋಫ್ರೇಮ್,ಗಂಧದ ಮಾಲೆ, ಪ್ಲಾಸ್ಟಿಕ್ ಹೂವು,ಗಂಧ ತೇಯುವ ಕಲ್ಲೂ ಸೇರಿದಂತೆ ಪೂಜಾ ಸಾಮಗ್ರಿಗಳು ಭಾರತಕ್ಕೆ ಚೀನಾದಿಂದ ಬಹಳ ದೊಡ್ಡ ಪ್ರಮಾಣದಲ್ಲಿ ಬರ್ತಾ ಇವೆಯಂತೆ!

ಅಂಕಿ-ಸಂಖ್ಯೆಗಳ ವಿವರದಲ್ಲಿ ಹೇಳೋದಾದ್ರೆ:
ಕಳೆದ ವರ್ಷ ಚೀನಾದ ಯಿವು ಎಂಬ ನಗರದಲ್ಲಿ ತಯಾರಾದ ಎಂಟು ಕೋಟಿ ವಿವಿಧ ಬಗೆಯ ಗಣೇಶನ ವಿಗ್ರಹಗಳು ಭಾರತಕ್ಕೆ ರಫ್ತಾಗಿದೆ.
ಸುಮಾರು ಎರಡು ಕೋಟಿ ಕೃಷ್ಣ,ಹನುಮಂತ,ತಿರುಪತಿ ವೆಂಕಟೇಶ,ಪದ್ಮನಾಭ,ಶಬರಿಮಲೆ ಅಯ್ಯಪ್ಪ ವಿಗ್ರಹಗಳು ಯಿವು ನಗರದಿಂದ ಬಂದಂಥವು.
ನಾವು ಪೂಜಿಸುವ ಈ ವಿಗ್ರಹಗಳ ಪೈಕಿ ಶೇ.55ರಷ್ಟು ಚೀನಾದಲ್ಲಿ ತಯಾರಾದವು!
ಈ ವರ್ಷವೊಂದರಲ್ಲಿಯೇ ಚೀನಾ ಹನ್ನೆರಡು ದಶಲಕ್ಷ ಟನ್ ಕುಂಕುಮವನ್ನು ಭಾರತಕ್ಕೆ ರಫ್ತು ಮಾಡಲಿದೆ.ಈ ಕುಂಕುಮ ಭಾರತದಲ್ಲಿ ಸಿಗುವುದಕ್ಕಿಂತ ಕಡಿಮೆ ಬೆಲೆಗೆ ಸಿಗುತ್ತದೆಯೆಂಬುದನ್ನು ಗಮನಿಸ್ಬೇಕು.
ಕಳೆದ ಮೂರು ವರ್ಷಗಳಲ್ಲಿ ಚೀನಾ ಭಾರತಕ್ಕೆ ಕಳಿಸಿದ ಕರ್ಪೂರ ನಲುವತ್ತೊಂದು ಲಕ್ಷ ಟನ್!
ಈ ವರ್ಷ ಚೀನಾ,ಕನ್ನಡವೂ ಸೇರಿದಂತೆ ಭಾರತದ ಎಲ್ಲ್ಲಾ ಭಾಷೆಗಳಲ್ಲಿ ಮುದ್ರಿಸಿದ ಸುಮಾರು ಮುನ್ನೂರು ಪುಟಗಳನ್ನು ಒಳಗೊಂಡ ನಾಲ್ಕು ಕೋಟಿ 'ಭಗವದ್ಗೀತೆ'ಯ ಪ್ರತಿಗಳನ್ನು ನಮ್ಮಲ್ಲಿಗೆ ಕಳುಹಿಸಲು ನಿರ್ಧರಿಸಿದ್ಯಂತೆ!


ಇದು ಹೀಗೇ ಮುಂದುವರಿದ್ರೆ ಇನ್ನು ಒಂದೆರಡು ವರ್ಷಗಳಲ್ಲಿ ಭಾರತದ ಎಲ್ಲ ದೇಗುಲಗಳಲ್ಲಿನ, ಎಲ್ಲರ ಮನೆ ಪೂಜಾಕೋಣೆಯಲ್ಲಿನ ವಸ್ತುಗಳೆಲ್ಲ Made in China ಆಗೋದು ಖಚಿತ."

"ಅಬ್ಬ ಚೀನಾದ ಸಾಧನೆಯೇ!" ಅಂತ ನಾವು ಮೂಗುಮುರಿದು ಬೆರಗಾಗಿ ಕಣ್‌ಕಣ್ ಬಿಡೋ ಹೊತ್ಗೆ ಚೀನಾ ನಮ್ಮ ಜೀವನದ ಮೂಲವನ್ನು ಅಲುಗಾಡಿಸಿಬಿಟ್ಟಿರುತ್ತೆ. ಖಂಡಿತ ನಾವು ಈಗ ಎಚ್ಚೆತ್ಕೊಳ್ಳೇಬೇಕು. ಇಷ್ಟೊಂದು ದೊಡ್ಡಮಟ್ಟಿನ ವಹಿವಾಟು ಚೀನಾಕ್ಕೆ ಸಿಗ್ಬೇಕಾದ್ರೆ ಅದ್ಕೆ ನಮ್ಮವ್ರೇ ಕಾರಣ ತಾನೆ..? ನಾವು order ಕೊಟ್ರೇನೆ ತಾನೆ ಅವ್ರು ಮಾಡೋದು.. 2020ರ ಹೊತ್ಗೆ ಭಾರತ ನಂಬರ್ ವನ್ ಆಗುತ್ತೇಂತ ಕನಸು ಕಾಣ್ತಾ, ಹಾಯಾಗಿ ನಿದ್ದೆ ಮಾಡ್ತಾ ಇದ್ರೆ 'ವ್ಯಾಪಾರಿ ಆಕ್ರಮಣ'ಗಳು ನಮ್ಮ ಅಂತಃಸ್ಸತ್ವವನ್ನೇ ಕರಗಿಸಿಬಿಡುತ್ವೆ. ನಮ್ಮಲ್ಲಿನ ಸ್ವ-ಉದ್ಯೋಗ, ಗುಡಿಕೈಗಾರಿಕೆಗಳು ಹೇಳಹೆಸರಿಲ್ಲದಂತೆ ಮಾಯವಾಗಿ ಬಿಡುತ್ವೆ. ಮತ್ತೊಮ್ಮೆ ದಾಸ್ಯದ ಬಲೆಗೆ ಸಿಲುಕಿಕೊಳ್ಳೋ ಮೊದ್ಲು ಜಾಗೃತರಾಗೋಣ. ಜಾಗೃತರಾಗ್ಲೇಬೇಕು.. ಅಲ್ವ..?

02 March 2010

ತಪ್ಪು ಯಾರದ್ದು. . .??



ಸ್ನೇಹಿತ್ರೆ, ಕಳ್ದ ಕೆಲವು ತಿಂಗಳುಗಳಿಂದ ಹೆಚ್ಚು ಹೆಚ್ಚು ಜನಪ್ರಿಯವಾಗುತ್ತಿರುವ ಒಂದು so called 'ರಿಯಾಲಿಟಿ ಶೋ'ದ ಬಗ್ಗೆ ಹೇಳಲೇಬೇಕನಿಸ್ತು.  ಮೇಲ್ನೋಟಕ್ಕೆ ಅದೊಂದು ಉತ್ತಮ ಕೌನ್ಸಿಲಿಂಗ್ ಕಾರ್ಯಕ್ರಮದ ಹಾಗೆ ಭಾಸವಾಗುತ್ತೆ.  ಅಥವ ಆ ರೀತಿ ಭಾಸವಾಗುವಂತೆ ತೋರ್ಪಡಿಸ್ತಾರೆ.  ಅವರು ಹೇಳೋ ಪ್ರಕಾರ ಅವರ ಉದ್ದೇಶ ನೊಂದ ಮನಗಳಿಗೆ ಸಾಂತ್ವನ ಹೇಳೋದು, ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸೋದು, ಮನಸ್ತಾಪಗಳನ್ನು ದೂರೈಸಿ ನೆಮ್ಮದಿ ನೀಡೋದು ಇತ್ಯಾದಿ
ಇತ್ಯಾದಿ...  ಈ ಬಣ್ಣದ ಮಾತುಗಳಿಗೆ ಮರುಳಾಗಿ ಹಲವಾರು ಜನ, ನಮ್ಮ ಸಮಸ್ಯೆಗಳೂ ಬಗೆಹರಿದಾವು ಎಂಬ ಆಶಾಭಾವದಿಂದ ಈ ಚಾನೆಲ್ ಗಳ ಮೊರೆಹೋಗ್ತಾರೆ.      

ಆದರೆ ಅವರು ಮಾಡೋದೇನು....?  ಸಂಸಾರದ ನಾಲ್ಕು ಗೋಡೆಗಳ ಮಧ್ಯೆಯೇ ಬಗೆಹರಿಯಬೇಕಾದಂಥ ಸಮಸ್ಯೆಗಳನ್ನು ಜಗಜ್ಜಾಹೀರು ಮಾಡಿ, ವೀಕ್ಷಕರ ಹತ್ರ "ಇಲ್ಲಿ ತಪ್ಪು ಯಾರದ್ದು..?" ಅಂತ ಕೇಳ್ತಾರೆ.  ಇಲ್ಲಿ ತಪ್ಪು ಮತ್ತ್ಯಾರದ್ದೂ ಅಲ್ಲ, ಆ ಚಾನೆಲ್ ನವರದ್ದೇ.  ಗಂಡ-ಹೆಂಡತಿ, ಅತ್ತೆ-ಸೊಸೆ, ಅಣ್ಣ-ತಮ್ಮ, ತಂದೆ-ಮಗ ಕಚ್ಚಾಡುವುದನ್ನೇ ಒಂದು 'ಕಾರ್ಯಕ್ರಮ' ಅಂತ ಮಾಡಿ ತೋರಿಸ್ತಾರಲ್ಲ ಏನೆನ್ನಬೇಕು ಇದಕ್ಕೆ....ಕೊನೆಗೆ ಅವರಿಗೆ ತಾವೇ ಸಾಂತ್ವನ ಹೇಳಿ, ಅವರ ಸಮಸ್ಯೆಯನ್ನು ತಾವೇ ಬಗೆಹರಿಸಿದ್ದೇವೇಂತ ಪೋಸು ಕೊಡ್ತಾರೆ.  ಸಮಸ್ಯೆ ಬಗೆಹರಿಸುವ ಒಳ್ಳೆ ಮನಸ್ಸು ಇದ್ರೆ, ಅವರ ಸ್ಟುಡಿಯೊದೊಳ್ಗಡೆನೇ ಒಂದು ಕೌನ್ಸಿಲಿಂಗ್ ಮಾಡಿ, ಮನಸ್ತಾಪ ಪರಿಹರಿಸ್ಬಹುದಲ್ಲ... ಅದನ್ನು ಚಿತ್ರೀಕರಿಸಿ ಊರೆಲ್ಲ ಪ್ರಚಾರ ಮಾಡೋ ಅಗತ್ಯ ಇದ್ಯಾ?  ಈ ರೀತಿ ಮಾಡೋದ್ರಿಂದ ಆ ಸಂಸಾರದ ಮಾನ, ಮರ್ಯಾದೆ ಬೀದಿಪಾಲಾಗುತ್ತೆ ಅನ್ನುವ ಕನಿಷ್ಟ ಜ್ಞಾನ ಕೂಡ ಇವ್ರಿಗೆ ಇಲ್ವ...?!  ಮುಂದೆ ಅವರು ಸರಿಯಾಗಿ ಬದುಕಲು ಪ್ರಾರಂಭಿಸಿದರೂ ಸುತ್ತಲಿನ ಸಮಾಜ ಅವರನ್ನು ಯಾವ ದೃಷ್ಟಿಯಲ್ಲಿ ನೋಡೀತು...?  ಪ್ರತಿಬಾರಿಯೂ ಬೊಟ್ಟುಮಾಡಿ ತೋರಿಸಿ ನಗುವ ಜನರ ಮಧ್ಯೆ ಅವರ ಜೀವನ ಇನ್ನಷ್ಟು ನರಕಸದೃಶವಾಗೊಲ್ವೆ...?

ಮಾಧ್ಯಮಗಳು ಯಾವಾಗಲೂ ಜನಪರ ಕಾರ್ಯಕ್ರಮಗಳಿಗೆ, ಸಮಾಜದ ಏಳಿಗೆಗೆ ಒತ್ತುಕೊಡುವಂಥ ಕಾರ್ಯಕ್ರಮಗಳಿಗೆ ಮನ್ನಣೆ ನೀಡಬೇಕಲ್ಲ... ಟಿ.ಆರ್.ಪಿ ಗಿಟ್ಟಿಸುವ ಭರದಲ್ಲಿ ಜನಜೀವನಕ್ಕೆ ಮುಳುವಾಗುವಂಥ ಕಾರ್ಯಕ್ರಮಗಳನ್ನು ಹುಟ್ಟುಹಾಕೋದು ಎಷ್ಟು ಸರಿ...?

ಗುರುತು ಪರಿಚಯವೇ ಇಲ್ಲದ ನಮ್ಮನ್ನುಳಿಸೋದಕ್ಕಾಗಿ ಸಾವಿರಾರು ಯೋಧರು ಹಗಲಿರುಳು ಹೊಣೆಯುತ್ತಿದ್ದಾರೆ, ಹಿಮಪಾತಕ್ಕೆ ಬಲಿಯಾಗ್ತಿದಾರೆ.  ಅವರ ಕಷ್ಟ, ನೋವುಗಳು, ಅವರ ಕುಟುಂಬದ ಪರಿಸ್ಥಿತಿ ಇತ್ಯಾದಿಗಳ ಬಗ್ಗೆ ಯಾರೂ ಯೋಚಿಸೋದೇ ಇಲ್ಲ.  ಆ ಬಗ್ಗೆ ಬೆಳಕು ಚೆಲ್ಲುವ ಕಾರ್ಯಕ್ರಮ ಮಾಡಿದರೆ ಅಷ್ಟಾದ್ರೂ ಪುಣ್ಯ ಬಂದೀತು.  ಉಂಡು ಮಲಗುವಲ್ಲಿಗೆ ಮುಗಿಯಬೇಕಾದ ಗಂಡಹೆಂಡಿರ ಜಗಳಕ್ಕೆ ರಂಗುರಂಗಿನ ಕಥೆಕಟ್ಟಿ ಜಗಜ್ಜಾಹೀರು ಮಾಡುವ ಬದಲು ದೇಶದೇಳಿಗೆಗೆ ಪೂರಕವಾಗುವ ಕಾರ್ಯಕ್ರಮಗಳನ್ನು ಮಾಡಬಾರದೇಕೆ?

ಮೊದಲು ಇಂಥ ಕಾರ್ಯಕ್ರಮಗಳಿಗೆ ಕುಮ್ಮಕ್ಕು ನೀಡುವ ನಾವು ಎಚ್ಚೆತ್ಕೊಬೇಕು.  ಟೀವಿಯಲ್ಲಿ ಕಾಣಿಸಿಕೊಳ್ಳಬೇಕನ್ನೊ ಹುಚ್ಚುಆಸೆಯ ಬಿರುಗಾಳಿಗೆ ಸಂಸಾರ ನೌಕೆ ಬಲಿಯಾಗದಂತೆ ನೋಡಿಕೊಳ್ಬೇಕು. ಇಂಥ ಕಾರ್ಯಕ್ರಮಗಳ ವಿರುದ್ಧ ಒಕ್ಕೊರಲ ಹೋರಾಟ ನಡೀಬೇಕು.  ಅವರವರೊಳಗೆ ಬಗೆಹರಿಸಿಕೊಳ್ಳಬೇಕಾದ ಸಮಸ್ಯೆಗಳಿಗೆ ಬಹಿರಂಗ ಪ್ರಚಾರ ನೀಡಿ, ಅದನ್ನು ಮತ್ತಷ್ಟು ಉಲ್ಬಣಗೊಳಿಸುವ ಕಾರ್ಯಕ್ರಮಗಳಿಗೆ ಬಹಿಷ್ಕಾರವಿರ್ಲಿ.
ಏನಂತೀರಿ..?